ಮೂಡುಬಿದಿರೆ, ಸೆ.6: ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆಯ ಶುಭಾರಂಭ ಸಮಾರಂಭವು ಮೂಡುಬಿದಿರೆಯಲ್ಲಿ ಇಂದು ನಡೆಯಿತು. ಸರ್ಕಾರಿ ಆಸ್ಪತ್ರೆ ರಸ್ತೆಯ ಪ್ರಭು ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ನೂತನ ಶಾಖೆ ಕಾರ್ಯಾರಂಭಗೊಂಡಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 1997ರಲ್ಲಿ ಆರಂಭಗೊಂಡ ಸಹಕಾರ ಸಂಘ ಇದೀಗ 30ನೇ ವರ್ಷಕ್ಕೆ ಕಾಲಿಡುತ್ತಿರುವುದು ಸಂತಸದ ವಿಚಾರ ಎಂದರು. ₹500 ಠೇವಣಿಯಿಂದ ಆರಂಭವಾದ ಸಂಘ ಇಂದು ದೊಡ್ಡ ಮಟ್ಟದ ವ್ಯವಹಾರ ನಡೆಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಆರಂಭಗೊಂಡಿರುವುದು ಸಂತಸದ ಸಂಗತಿ ಎಂದರು. ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮೂಡುಬಿದಿರೆಯ ನೀರಿನ ಸಮಸ್ಯೆ ನಿವಾರಣೆಗೆ ವೆಂಟೆಡ್ ಡ್ಯಾಂ ನಿರ್ಮಾಣಕ್ಕೆ ₹55 ಕೋಟಿ ಅನುದಾನ ತಂದಿದ್ದನ್ನು ಸ್ಮರಿಸಿದರು.
ಸಂಘದ ಅಧ್ಯಕ್ಷ ಜೆ. ಕೃಷ್ಣ ಪಾಲೆಮಾರ್ ಮಾತನಾಡಿ, ಮೂಡುಬಿದಿರೆಯಲ್ಲಿ ಶಾಖೆ ಆರಂಭಿಸುವುದು ಬಹುದಿನಗಳ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಆಳ್ವಾಸ್ ಸಂಸ್ಥೆ, ಅಭಯಚಂದ್ರ ಜೈನ್ ಹಾಗೂ ಶಾಸಕರ ಸಹಕಾರ ದೊರೆತಿದೆ ಎಂದು ಹೇಳಿದರು. ಪ್ರಸ್ತುತ ಸಂಘವು ₹500 ಕೋಟಿ ವ್ಯವಹಾರ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಕರಾವಳಿಯ ಇನ್ನಷ್ಟು ಪ್ರದೇಶಗಳಲ್ಲಿ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಿದೆ ಎಂದರು.
ಸಂಘದ ಅಭಿವೃದ್ಧಿಗೆ ಸಮಾಜ ಬಾಂಧವರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಉದ್ಯಮಿ ಶ್ರೀಪತಿ ಭಟ್, MCS ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಪ್ರೇಮಾನಂದ ಕೆ.ಎಸ್., ದಿನೇಶ್ ರಾವ್, ಚಂದನ್ ಕೋಟೆಕಾರ್, ಚಂದ್ರಿಕಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
