ಮಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು (ಆಗಸ್ಟ್ 13) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಾಂಪ್ರದಾಯಿಕ ‘ಆಟಿಡೊಂಜಿ ದಿನ’ವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಇಬ್ಬರು ಸಾಧಕ ಮಹಿಳೆಯರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಭಾರತೀಯ ಸೇನೆಯ ಸಿ.ಆರ್.ಪಿ.ಎಫ್ (CRPF) 221ನೇ ಬೆಟಾಲಿಯನ್ನ ವಿ.ಎಸ್ ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಕದ್ರಿಯ ನಿವಾಸಿ ಶ್ರೀಮತಿ ಅಹಲ್ಯಾ ಕುಲಾಲ್ ಹಾಗೂ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ಆಶಾ ನಾಗರಾಜ ಅವರನ್ನು ಈ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಯತೀಶ್ ಅರ್ವಾರ್ ಉಪಸ್ಥಿತರಿದ್ದು, ಸಾಧಕರ ಸೇವಾ ಮನೋಭಾವವನ್ನು ಶ್ಲಾಘಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಪೂಜಾ ಪೈ, ಕವಿತಾ ಸನಿಲ್, ವಸಂತಿ ಮಚ್ಚಿನ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಸುಧಾ ಸುರೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರೆ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಕಿತಾ ಆರ್. ಶೆಟ್ಟಿ ಅವರು ಧನ್ಯವಾದ ಸಮರ್ಪಿಸಿದರು.
