HOMELATEST NEWSUDUPI

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಚರ್ಚ್‌ ರಸ್ತೆಯಲ್ಲೇ ಬರ್ಬ*ರ ಹ*ತ್ಯೆ

ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಬೆಳ್ಳಂ ಬೆಳಗ್ಗೆ ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ನಡೆದಿದೆ.

ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು.

ಘಟನೆ ವಿವರ

ಐವನ್ ರಿಚರ್ಡ್ ಮಸ್ಕರೇನಸ್ ಎಂಬುವವರು ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಇಂದು ಮುಂಜಾನೆ 3.30ರ ಸುಮಾರಿಗೆ ಅದೇ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ವ್ಯಕ್ತಿಯೊಬ್ಬ ಅಡ್ಡಗಟ್ಟಿ ಪಿಸ್ತೂಲ್‌ನಲ್ಲಿ ಗುಂಡಿಕ್ಕಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಮಹಿಳೆ ಆರೋಪಿಯ ಗುರುತು ಹಚ್ಚಿದ್ದು, ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ತಿಳಿದು ಬಂದಿಲ್ಲ, ಹಣಕಾಸು ಅಥವಾ  ಕೌಟುಂಬಿಕ ಕಲಹ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.

ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Share News