ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯನ್ನು ತಡೆದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತೇವೆಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪ್ರಕರಣದ ವಿವರ
ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ಜು.5 ರ ಮಧ್ಯಾಹ್ನದ ವೇಳೆ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಥಳಕ್ಕೆ ಬಂದು ಬಾಲಕ ಹಾಗೂ ಬಾಲಕಿಯನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿದ್ದಾರೆ.
ಜೊತೆಗೆ ಬಾಲಕ ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್ ಸ್ಟ್ರಾಗ್ರಾಮ್ ನಲ್ಲಿ ಹರಿಯಬಿಟ್ಟಿದ್ದಾರೆ. ಈ ಹಿನ್ನೆಲೆ ಬಾಲಕನ ತಂದೆ ದೂರು ನೀಡಿದ್ದು,
ಅದರನ್ವಯ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ ಇಬ್ಬರು ವ್ಯಕ್ತಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.
ಪ್ರಕರಣದಲ್ಲಿ ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.