ಮಂಗಳೂರು ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಿಸುವ ಕಾರ್ಯ ಆರಂಭಿಸುವಂತೆ ಅವರಿಗೆ ತಿಳಿಸಲಾಗಿದೆ.
ಬೂತ್ ಅಧ್ಯಕ್ಷರಾಗಿ, ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾಗಿ ಹೀಗೆ ವಿವಿಧ ಹಂತಗಳಲ್ಲಿ ಅವರು ಪಕ್ಷ ಸೇವೆ ಸಲ್ಲಿಸಿದ್ದಾರೆ.
ಪಕ್ಷಕ್ಕಾಗಿ ಬೂತ್ ಮಟ್ಟದಿಂದ ದುಡಿದಿರುವ ಜಿಲ್ಲಾ ಮುಖಂಡರಾದ ಡೆನಿಸ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಳ ಪರವಾಗಿ ನಗರ ಪಾಲಿಕೆ, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅತ್ಯುತ್ತಮ ಸಂಘಟಕರಾದ ಅವರು ಸಾಮಾಜಿಕ ಸಾಮರಸ್ಯ ಮೂಡಿಸುವ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವಾಗಿಯೂ ಗುರುತಿಸಿಕೊಂಡಿದ್ದಾರೆ. ಜೊತೆಗೆ, ಭಾರತೀಯ ಕಥೋಲಿಕ ಯುವ ಸಂಚಾಲನದ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾಗಿ ಹಾಗೂ ರಾಜ್ಯಾಧ್ಯಕ್ಷರಾಗಿ ಸಮುದಾಯದ ಉನ್ನತಿಗೆ ಶ್ರಮಿಸಿದ್ದಾರೆ. ಸಾಕಷ್ಟು ಸಾಮಾಜಿಕ ಚಟುವಟಿಕೆಗಳನ್ನು ಕೂಡ ಆಯೋಜಿಸುತ್ತಾ ಬಂದಿರುವುದರ ಜೊತೆಗೆ ವಿಪತ್ತು ನಿರ್ವಹಣೆ ಪರಿಹಾರ ಕಾರ್ಯಾಚರಣೆಗಳಲ್ಲೂ ಪಾಲ್ಗೊಂಡಿದ್ದಾರೆ.