ಮಂಗಳೂರು,ಫೆ.27 :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ. ಉದ್ಘಾಟಿಸಿದರು. ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆಯ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ. ಅವರು ಅಧ್ಯಕ್ಷತೆ ವಹಿಸಿದ್ದರು.
ಪ್ರಾದೇಶಿಕ ಕಾಲೇಜು ಶಿಕ್ಷಣ ಕಚೇರಿಯ ವಿಶೇಷ ಅಧಿಕಾರಿ ಡಾ. ಶ್ರೀಧರ್ ಮಣಿಯಾಣಿ, ಮಂಗಳೂರು ವಿವಿಯ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕ ಡಾ. ಶೇಷಪ್ಪ ಅಮೀನ್, ಸೈಂಟ್ ಆಗ್ನೆಸ್ ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಉದಯಕುಮಾರ್ ಬಿ. ಮತ್ತು ಮೈ ಭಾರತ್ ಮಂಗಳೂರು ವಿಭಾಗದ ಜಗದೀಶ್ ಕೆ. ಉಪಸ್ಥಿತರಿದ್ದರು.
ಸ್ಪರ್ಧೆಯ ತೀರ್ಪುಗಾರರಾಗಿ ಉದಯವಾಣಿ ಮಣಿಪಾಲದ ಅಧ್ಯಕ್ಷ ರಾಮಚಂದ್ರ ಮಿಜಾರ್, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಂದಕಿಶೋರ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಯತೀಶ್ ಕುಮಾರ್ ಹಾಗೂ ಉಡುಪಿಯ ಯುವ ಐಕಾನ್ ಬಿ. ಮಾನ್ಯ ಶೆಟ್ಟಿ ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೂರಾರು ಯುವ ಪ್ರತಿಭೆಗಳು ಈ ಯುವ ಸಂಸತ್ನಲ್ಲಿ ಪಾಲ್ಗೊಂಡು ದೇಶದ ಅಭಿವೃದ್ಧಿಯ ಬಗ್ಗೆ ತಮ್ಮ ವಿಚಾರಗಳನ್ನು ಮಂಡಿಸಿದರು. ಇವರಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ 5 ಜನ ಅಭ್ಯರ್ಥಿಗಳು ಮುಂಬರುವ ದಿನಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದಲ್ಲಿ ವಿಜೇತರಾಗುವ 3 ಅಭ್ಯರ್ಥಿಗಳು ನವದೆಹಲಿಯ ಭಾರತೀಯ ಸಂಸತ್ ಭವನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಯುವ ಸಂಸತ್ನಲ್ಲಿ ಭಾಗವಹಿಸಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ತಮ್ಮ ಜಿಲ್ಲೆ ಮತ್ತು ರಾಜ್ಯದ ಧ್ವನಿಯಾಗಲಿದ್ದಾರೆ.

