ಪುತ್ತೂರು: ವಿಟ್ಲದ ಕೇಪು ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಡಿ. 20ರಂದು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಸಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಅಧಿಕಾರಿ/ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಲವು ಜನರು ಕೋಳಿ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡುಬಂದಿತ್ತು. ಅಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರ ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ತಿಳಿವಳಿಕೆ ನೀಡಲಾಗಿತ್ತು.
ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ಶಾಸಕರು, ಸ್ಥಳದಲ್ಲಿ ಸೇರಿದ್ದ ಜನರಿಗೆ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಟೇರಣೆ ನೀಡಿದ್ದು, ಸ್ಥಳದಲ್ಲಿ ಸೇರಿದ್ದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಪ್ರಾರಂಭಿಸಿರುತ್ತಾರೆ ಎಂದು ಆರೋಪಿಸಲಾಗಿತ್ತು.
ಈ ವೇಳೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕಾನೂನು ಬಾಹಿರವಾಗಿ ಕೋಳಿ ಅಂಕದಲ್ಲಿ ತೊಡಗಿಕೊಂಡ 16 ಜನರನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿಗಳನ್ನು) ಸ್ವಾಧೀನಪಡಿಸಿರುತ್ತಾರೆ.
ವ್ಯಕ್ತಿಯೊಬ್ಬರು ತಮ್ಮ ಜಾಗದಲ್ಲಿ ಪರವಾನಗಿ ಪಡೆಯದೇ ಕಾನೂನು ಬಾಹಿರ ಮಾಡಿಕೊಟ್ಟಿರುವ ಕೃತ್ಯಕ್ಕೆ ಅನುವು ಹಿನ್ನೆಲೆಯಲ್ಲಿ, ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ಅಶೋಕ್ ಕುಮಾರ್ರೈ ವಿರುದ್ಧ ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶಾಸಕರ ಮೇಲ್ಮನವಿ
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಅಶೋಕ್ ಕುಮಾರ್ರೈಯವರು ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನುವಿಚಾರಣೆಗೆತ್ತಿಕೊಂಡಿರುವ ನ್ಯಾಯಪೀಠ, ಈ ಪ್ರಕರಣದಲ್ಲಿ ಮುಂದಿನ ಆದೇಶದ ತನಕ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ದೂರುದಾರ ಶಾಸಕರ ಪರವಾಗಿ ಹೈಕೋರ್ಟ್ನ ಹಿರಿಯ ವಕೀಲ ಅರುಣ್ ಶ್ಯಾಂ ಪುತ್ತೂರು ವಾದಿಸಿದ್ದರು.