ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಸೂಚಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರಾ.ಹೆ.ಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾ.ಹೆ. ಪ್ರಾಧಿಕಾರಕ್ಕೆ ಸೂಚಿಸ ಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದರು.
ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಕಾಲೇಜುಗಳ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್ಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದ ಜಿಲ್ಲಾಧಿಕಾರಿ.
ನಗರದ ಮಾಲ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದರು.

