ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆಗಳ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು,ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಅನುದಾನಗಳ ಬಿಡುಗಡೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ವಿವರವಾಗಿ ಚರ್ಚಿಸಲಾಯಿತು. ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18, 2026ರಂದು ಮಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಈ ಸಚಿವ ಸಂಪುಟ ಸಭೆಯ ಮೂಲಕ ಕರಾವಳಿ ಜಿಲ್ಲೆಗಳ ಸಮಗ್ರ ಹಾಗೂ ದೀರ್ಘಕಾಲಿಕ ಅಭಿವೃದ್ಧಿಗೆ ಪೂರಕವಾದ ಶಾಶ್ವತ ಯೋಜನೆಗಳನ್ನು ರೂಪಿಸುವಂತೆ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು, ಕಾರ್ಕಳ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮ, ಕಂಬಳ, ಮೂಲಭೂತ ಸೌಕರ್ಯಗಳು, ಉದ್ಯೋಗ ಹಾಗೂ ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು, ಅವುಗಳಿಗೆ ಅಗತ್ಯವಿರುವ ಅನುದಾನ ಹಾಗೂ ಆಡಳಿತಾತ್ಮಕ ಮಂಜೂರಾತಿ ನೀಡುವಂತೆ ಹಲವು ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ಸುದೀರ್ಘವಾಗಿ ಚರ್ಚಿಸಿದ್ದು ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮುಖ್ಯಮಂತ್ರಿಯವರಲ್ಲಿ ಪ್ರಸ್ತಾಪಿಸಲಾದ ಪ್ರಮುಖ ಬೇಡಿಕೆಗಳು:
*ಮಹಾಮಸ್ತಕಾಭಿಷೇಕ ವಿಶೇಷ ಅನುದಾನ: ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾ ಭಿಷೇಕದ ಪ್ರಯುಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವುದು.
*ರಸ್ತೆ ಅಭಿವೃದ್ಧಿ: ಕಾರ್ಕಳ ಪುರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮತ್ತು ಹಿರಿಯಡ್ಕ –ಕಾರ್ಕಳ–ಜೋಡುರಸ್ತೆ–ಮಿಯ್ಯಾರು– ಬಜಗೋಳಿ ಮಾರ್ಗವಾಗಿ ಗುರುವಾಯನಕೆರೆವರೆಗೆ ರಸ್ತೆ ಅಭಿವೃದ್ಧಿ.
*ಭಾಷೆ ಮತ್ತು ಸಂಸ್ಕೃತಿ: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದು ಹಾಗೂ ಕರಾವಳಿ ಜಿಲ್ಲೆಗಳ ಕಂಬಳ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು.
*ಪ್ರವಾಸೋದ್ಯಮ ಮತ್ತು ಪರಂಪರೆ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿ, ಐತಿಹಾಸಿಕ ರಾಮಸಮುದ್ರ ಕೆರೆ ಹಾಗೂ ಉದ್ಯಾನವನ ಅಭಿವೃದ್ಧಿ, ವರಂಗ ಚತುರ್ಮುಖ ಕೆರೆ ಬಸದಿ ಮತ್ತು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಫಾಲ್ಸ್ ಅಭಿವೃದ್ಧಿ.
*ಉದ್ಯೋಗ ಮತ್ತು ಕೈಗಾರಿಕೆ: ಯುವ ಸಮುದಾಯಕ್ಕೆ ಸ್ವಯಂ ಉದ್ಯೋಗದ ಅವಕಾಶಕ್ಕಾಗಿ ಕಾರ್ಕಳದಲ್ಲಿ ಶಿಲ್ಪಕಲಾ ಹಾಗೂ ಫರ್ನಿಚರ್ ಹಬ್ ಸ್ಥಾಪನೆ ಮತ್ತು ಕಾರ್ಕಳ ಜವಳಿ ಪಾರ್ಕ್ ಯೋಜನೆಯ ಅಭಿವೃದ್ಧಿ.
*ಆರೋಗ್ಯ ಮತ್ತು ಶಿಕ್ಷಣ: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವುದು ಮತ್ತು ಕಾರ್ಕಳ ನರ್ಸಿಂಗ್ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ.
*ನೀರಾವರಿ: ಹೆಬ್ರಿ ತಾಲೂಕಿನ ಬೇಳಂಜೆ ಗ್ರಾಮದ ಇಕ್ಕೊಡ್ಡು ಬಳಿ ಏತ ನೀರಾವರಿ ಯೋಜನೆ ಅನುಷ್ಠಾನ. ಹಲವು ಬೇಡಿಕೆಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.
