ಮಂಗಳೂರು, :ಕಂಕನಾಡಿಯ ನಾಗುರಿಯಲ್ಲಿ ಜುಲೈ 1 ರಂದು ನಡೆದಿದ್ದ ಭೀಕರ ಮನೆ ಕುಸಿತ ದುರಂತದ ಸಂದರ್ಭದಲ್ಲಿ ಸಮಯಪ್ರಜ್ಞೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಅಮೂಲ್ಯ ಜೀವಗಳನ್ನು ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಮಹಮ್ಮದ್ ಝುಲ್ಫಿಕರ್ ನವಾಜ್ ಕೆ.ಪಿ. ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಶ್ಲಾಘನೀಯ ಮತ್ತು ಕೃತಜ್ಞತಾ ಪತ್ರವನ್ನು ಸಲ್ಲಿಸಿ ಗೌರವಿಸಲಾಯಿತು. ಭಾನುವಾರ ನಡೆದ ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಗೌರವ ಸಮರ್ಪಣೆ ನಡೆಯಿತು.


ದುರಂತದ ಸಮಯದಲ್ಲಿ ಅಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಜ್ ಅವರು ಪ್ರದರ್ಶಿಸಿದ ಅಪ್ರತಿಮ ಧೈರ್ಯ, ತತ್ಕ್ಷಣದ ಸಮಯಪ್ರಜ್ಞೆ ಮತ್ತು ನಿಸ್ವಾರ್ಥ ಸೇವೆಯನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾನ್ಯ ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದರು. ಅಪಾಯಕಾರಿ ಸಂದರ್ಭದಲ್ಲಿ ಸ್ವಂತ ಜೀವದ ಹಂಗು ತೊರೆದು ಸಾರ್ವಜನಿಕರ ಪ್ರಾಣ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯ ವೈಖರಿ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವರು ಈ ವೇಳೆ ತಿಳಿಸಿದರು.

ಈ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ) ನರ್ವಾಡೆ ವಿನಾಯಕ ಕಾರ್ಭಾರಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


