ಮಂಗಳೂರು:ಏಪ್ರಿಲ್ 06: ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಡುಪದವಿನ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್.), ಮೊಂಟೆಪದವಿನಲ್ಲಿ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.
“ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ”
ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ಈ ಶಿಬಿರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಅಮೀನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜ ಸೇವೆಯ ಮೂಲಕ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಮತ್ತು ಡಿಜಿಟಲ್ ಸಾಕ್ಷರತೆಗೆ ಒತ್ತು ನೀಡಬೇಕು ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ. ಹಾಸಿಂ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್, ಪ್ರಗತಿಪರ ಕೃಷಿಕ ಸತ್ಯನಾರಾಯಣ ಭಟ್ ಎಡಂಬಳೆ, ಕೆ.ಪಿ.ಎಸ್. ಮೊಂಟೆಪದವು ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಕೆ.ಬಿ., ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಹನೀಫ್ ಚಂದಹಿತ್ಲು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ನರಿಂಗಾನ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಶೈಲಜಾ ಶೆಟ್ಟಿ, ಕಾರ್ಯದರ್ಶಿ ನಳಿನಿ, ನಿಕಟಪೂರ್ವ ಸದಸ್ಯ ಅಬ್ದುಲ್ ರಹಿಮಾನ್ ಹಾಗೂ ನರಿಂಗಾನ ಯುವಕ ಮಂಡಲದ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಕುಮಾರಿ ಚೈತ್ರ ಎನ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಹಮ್ಮದ್ ಆಶಿಕ್ ಮತ್ತು ತಂಡದವರು ಎನ್.ಎಸ್.ಎಸ್. ಗೀತೆ ಹಾಡಿದರು. ಕಾರ್ಯಕ್ರಮಾಧಿಕಾರಿ ಶ್ರೀ ಗುರುರಾಜ್ ಪಿ. ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಕುಮಾರಿ ಖೈರುನ್ನೀಸ ವಂದಿಸಿ, ಆಂಗ್ಲ ಭಾಷಾ ಪ್ರಾಧ್ಯಾಪಕಿ ಶ್ರೀಮತಿ ಮುನೀರ ಎ. ಕಾರ್ಯಕ್ರಮ ನಿರೂಪಿಸಿದರು.