ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಮೇ 8ರಂದು ಮಧ್ಯಾಹ್ನ ಅರ್ಪಿತಾ (15), ಸುನೀತಾ (21), ಅಕ್ಷತಾ ಹಾಗೂ ನೆಟ್ಟಣ ನಿವಾಸಿ ಶ್ರೇಯಾ ಸೇರಿದಂತೆ ಕೆಲವರು ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಸಂಜೆ ಸುಮಾರು 4.30ರ ವೇಳೆಗೆ ನದಿಯಲ್ಲಿ ಈಜಾಡುತ್ತಿದ್ದ ಸಂದರ್ಭ ಅರ್ಪಿತಾ ಮತ್ತು ಸುನೀತಾ ನೀರಿನ ಆಳ ಅರಿಯದೆ ಮುಳುಗತೊಡಗಿದ್ದಾರೆ ಎನ್ನಲಾಗಿದೆ.
ಜೊತೆಯಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಬಳಿಕ ಸ್ಥಳೀಯ ನಿವಾಸಿ ಜಾರ್ಜ್ ಅವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಳಿಕ ಮೃತದೇಹಗಳನ್ನು ಕಡಬ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮರಣದಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.