ಉಡುಪಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ವೇಳೆ ನಡೆದಿದೆ.

ಮೃತ ಪಟ್ಟವರನ್ನು ಲಕ್ಷ್ಮೀ ಮಂಜುನಾಥ್ ಕೊಳ(37) ಎಂದು ಗುರುತಿಸಲಾಗಿದೆ. ಇವರು ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆಯಾಗಿದ್ದರು.
ಇಂದು ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆ ಮುಗಿಸಿ, ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದು, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
