canaratvnews

ಅಕ್ರಮ ಜಾನುವಾರು ಸಾಗಾಟ ಪತ್ತೆ; ಪೊಲೀಸರ ಮೇಲೆ ಕಾರು ಚಲಾಯಿಸಿ ಆರೋಪಿ ಪರಾರಿ, ಚಾಲಕನ ಬಂಧನ

ವಿಟ್ಲ, ಮೇ 21: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ತಡೆದ ವಿಟ್ಲ ಠಾಣೆಯ ಪೊಲೀಸರ ಮೇಲೆ ಬೆಂಗಾವಲು ಕಾರು ಚಲಾಯಿಸಿ, ಪ್ರಾಣಕ್ಕೆ ಅಪಾಯ ಉಂಟುಮಾಡಿ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿಯಲ್ಲಿ ಇಂದು (ಮೇ 21) ಬೆಳಿಗ್ಗೆ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಪಿಕ್‌ಅಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಎರಡು ಜಾನುವಾರು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಗೋಸಾಗಾಟದ ಕುರಿತು ಸಿಕ್ಕ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ ನಿರೀಕ್ಷಕ (SI) ರಾಮಕೃಷ್ಣ ಅವರು ತಮ್ಮ ಸಿಬ್ಬಂದಿಯೊಂದಿಗೆ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಜಾಗೃತರಾಗಿದ್ದರು. ಈ ವೇಳೆ ಆ ಮಾರ್ಗವಾಗಿ ಬಂದ KA-19-D-1496 ನೋಂದಣಿ ಸಂಖ್ಯೆಯ ಪಿಕ್‌ಅಪ್ ವಾಹನವನ್ನು ಪೊಲೀಸರು ತಡೆದು ನಿಲ್ಲಿಸಿದರು.

ಈ ಸಂದರ್ಭದಲ್ಲಿ ಸದರಿ ಪಿಕ್‌ಅಪ್ ವಾಹನಕ್ಕೆ ಬೆಂಗಾವಲಾಗಿ (Escort) ಬಂದಿದ್ದ KA-21- MA-0801 ಸಂಖ್ಯೆಯ ಸ್ವಿಫ್ಟ್ ಕಾರಿನಲ್ಲಿದ್ದ ಆರೋಪಿ ಬಶೀರ್ ಎಂಬಾತನು, ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಪ್ರಾಣಕ್ಕೆ ಅಪಾಯವಾಗುವಂತೆ ಅತ್ಯಂತ ಬೇಜವಾಬ್ದಾರಿಯಿಂದ ಕಾರನ್ನು ಚಲಾಯಿಸಿಕೊಂಡು ಹೋಗಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಚಾಲಕನ ಬಂಧನ ಮತ್ತು ಮುಟ್ಟುಗೋಲು: ಬಳಿಕ ಪೊಲೀಸರು ಜಾನುವಾರು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಅದರಲ್ಲಿ ಎರಡು ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆಯಾಗಿದೆ. ವಾಹನದ ಚಾಲಕ, ಬಂಟ್ವಾಳ ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ (44)ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಪರವಾನಗಿ ಇಲ್ಲದೆ ಜಾನುವಾರುಗಳನ್ನು ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆರೋಪಿ ಚಾಲಕನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಪಿಕ್‌ಅಪ್ ವಾಹನ ಹಾಗೂ ಹಿಂಸೆಗೆ ಒಳಗಾಗಿದ್ದ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.

ಪ್ರಕರಣ ದಾಖಲು:
ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಮೊಹಮ್ಮದ್ ಹನೀಪ್ ಮತ್ತು ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 114/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ: 118(1), 109, 132 ಜೊತೆಗೆ 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ: 5, 7, 12 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ: 11 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
Share News
Exit mobile version